ಬೆಂಗಳೂರು ಆ.11.ಬರದ ಪರಿಸ್ಥಿತಿ ಗಂಭೀರವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರಕ್ಕೆ ರಾಜ್ಯದ ಜನರ ಸಮಸ್ಯೆಗಳಿಗಿಂತ ಕಾಂಗ್ರೆಸ್ ಹೈಕಮಾಂಡ್ನ ರಾಜಕಾರಣವೇ ಮುಖ್ಯವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
“ರಾಜ್ಯದ ಕೃಷಿ ಸಚಿವರು ಯಾರು ಎಂಬುದೇ ಜನರಿಗೆ ಗೊತ್ತಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಖಾತೆ ಹಂಚಿಕೆ ಮಾಡಲಾಗದೆ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಕುಳಿತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ನ ಅನುಮತಿ ಇಲ್ಲದೆ ರಾಜ್ಯದಲ್ಲಿ ಒಂದು ಕಡ್ಡಿಯೂ ಅಲುಗಾಡುವುದಿಲ್ಲ ಎಂಬುದನ್ನು ಮುಖ್ಯಮಂತ್ರಿ ಪದೇಪದೇ ಸಾಬೀತುಪಡಿಸುತ್ತಿದ್ದಾರೆ. ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದ್ದರೂ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ” ಎಂದು ಅವರು ಟೀಕಿಸಿದರು.
ಮೊದಲು ಬರ ಘೋಷಿಸಿ, ನಂತರ ಪರಿಹಾರ ಕೇಳಿ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ವಿಜಯೇಂದ್ರ ತಿರುಗೇಟು
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರಾಜ್ಯ ಸರ್ಕಾರ ಮೊದಲು ತನ್ನ ರಾಜ್ಯದಲ್ಲಿ ಬರ ಘೋಷಣೆ ಮಾಡಬೇಕು ಎಂದು ಹೇಳಿದರು.
“ರಾಜ್ಯ ಸರ್ಕಾರವೇ ಬರ ಘೋಷಣೆ ಮಾಡದೆ ಕೇಂದ್ರ ಸರ್ಕಾರ ಹೇಗೆ ಬರ ಪರಿಹಾರ ನೀಡುತ್ತದೆ? ಬರ ಘೋಷಣೆ ಮಾಡದೆಯೇ ಕೇಂದ್ರ ಸರ್ಕಾರ ಪರಿಹಾರ ನೀಡಿರುವ ಒಂದು ಉದಾಹರಣೆಯನ್ನು ಪ್ರಿಯಾಂಕ್ ಖರ್ಗೆ ಅವರು ತೋರಿಸಲಿ” ಎಂದು ಅವರು ಸವಾಲು ಹಾಕಿದರು.
ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡಬಾರದು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.